Book_Chapter_Verse,Text 1PE_001_001,"ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ," 1PE_001_002,"ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ." 1PE_001_003,"ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ," 1PE_001_004,"ನಮ್ಮನ್ನು ಲಯ, ಕಳಂಕ, ನಾಶಗಳಿಲ್ಲದ ಬಾಧ್ಯತೆಯನ್ನು ಎದುರು ನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಡಲ್ಪಟ್ಟಿದೆ." 1PE_001_005,ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ. 1PE_001_006,"ಆದ್ದರಿಂದ ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ವಿಧ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ, ಹರ್ಷಿಸುವವರಾಗಿದ್ದೀರಿ." 1PE_001_007,"ನಾಶವಾಗುವಂತಹದ್ದೂ, ಬೆಂಕಿಯಿಂದ ಶೋಧಿಸುವಂತಹದ್ದೂ ಆಗಿರುವ ಬಂಗಾರಕ್ಕಿಂತಲೂ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವಂತಹದ್ದಾಗಿದೆ." 1PE_001_8-9,"ನೀವು ಆತನನ್ನು ಕಣ್ಣಾರೆ ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ. ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು, ನಿಮ್ಮ ನಂಬಿಕೆಯ ಅಂತ್ಯಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿ ಹೇಳಲಸಾಧ್ಯವಾದಂತಹ ಮಹಿಮೆಯುಳ್ಳ ಸಂತೋಷದಿಂದ ಹರ್ಷಿಸುತ್ತೀರಿ." 1PE_001_010,ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು. 1PE_001_011,ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು. 1PE_001_012,ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ. 1PE_001_013,"ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ." 1PE_001_014,"ವಿಧೇಯತ್ವವುಳ್ಳ ಮಕ್ಕಳಂತೆ ನಡೆಯಿರಿ, ನೀವು ಮೊದಲು ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ," 1PE_001_015,ನಿಮ್ಮನ್ನು ಕರೆದಾತನು ಪರಿಶುದ್ಧನಾಗಿರುವ ಪ್ರಕಾರವೇ ನೀವೂ ವಿಧೇಯರಾಗಿದ್ದು ಆತನಿಗೆ ನಿಮ್ಮ ಎಲ್ಲಾ ನಡವಳಿಕೆಗಳಲ್ಲಿ ಪರಿಶುದ್ಧರಾಗಿರಿ. 1PE_001_016,"ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು” ಎಂದು ಬರೆದಿದೆಯಲ್ಲಾ." 1PE_001_017,ಪ್ರತಿಯೊಬ್ಬನ ನಡತೆಯನ್ನು ನೋಡಿ ಪಕ್ಷಪಾತವಿಲ್ಲದೆ ತೀರ್ಪುಮಾಡುವಾತನನ್ನು ನೀವು ತಂದೆಯೆಂದು ಕರೆಯುವವರಾಗಿರುವುದರಿಂದ ಈ ಲೋಕದಲ್ಲಿನ ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ. 1PE_001_018,"ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ." 1PE_001_019,"ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ." 1PE_001_020,ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟವನಾಗಿದ್ದು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು. 1PE_001_021,ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ. 1PE_001_022,"ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ." 1PE_001_023,ಏಕೆಂದರೆ ನೀವು ಹೊಸದಾಗಿ ಹುಟ್ಟಿರುವಂಥದ್ದು ನಾಶವಾಗುವ ವಾಕ್ಯದಿಂದದ್ದಲ್ಲ. ಆದರೆ ನಾಶವಾಗದಂಥ ವಾಕ್ಯದಿಂದಲೇ. ಅದು ಸದಾ ಜೀವವುಳ್ಳ ದೇವರವಾಕ್ಯದ ಮೂಲಕ ಉಂಟಾಯಿತು. 1PE_001_024,ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅದರ ಮಹಿಮೆಯೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವುದು. ಅದರ ಹೂವು ಉದುರಿ ಹೋಗುವುದು. 1PE_001_025,ಆದರೆ ಕರ್ತನ ಮಾತೋ ಸದಾಕಾಲವೂ ಇರುವುದು.” ಆ ಮಾತು ಯಾವುದೆಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. 1PE_002_001,"ಆದಕಾರಣ ಎಲ್ಲಾ ಕೆಟ್ಟತನವನ್ನೂ, ಎಲ್ಲಾ ವಂಚನೆಯನ್ನೂ, ಕಪಟವನ್ನೂ, ಹೊಟ್ಟೆಕಿಚ್ಚನ್ನೂ, ಎಲ್ಲಾ ತರದ ದೂಷಣೆಯನ್ನು ವಿಸರ್ಜಿಸಿರಿ." 1PE_002_002,ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ. 1PE_002_003,ಏಕೆಂದರೆ ಕರ್ತನು ದಯಾಪರನೆಂದು ನೀವು ಅನುಭವಿಸಿ ತಿಳಿದಿದ್ದೀರಿ. 1PE_002_004,ನೀವು ಜೀವವುಳ್ಳ ಕಲ್ಲಾಗಿರುವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲನ್ನು ಜನರು ನಿರಾಕರಿಸಿದರು ಆದರೆ ಅದು ದೇವರಿಂದ ಆರಿಸಿಕೊಳ್ಳಲ್ಪಟ್ಟದು ಮತ್ತು ಆತನಿಗೆ ಅಮೂಲ್ಯವಾದದ್ದು ಆಗಿದೆ. 1PE_002_005,ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. 1PE_002_006,"“ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಳ್ಳಲ್ಪಟ್ಟದ್ದೂ ಮತ್ತು ಅತ್ಯಮೂಲ್ಯವಾದದ್ದೂ. ಆತನ ಮೇಲೆ ನಂಬಿಕೆಯಿಡುವವನು ಅವಮಾನಪಡುವುದೇ ಇಲ್ಲ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ." 1PE_002_007,"ಆದ್ದರಿಂದ ನಂಬುವವರಾದ ನಿಮಗೇ ಈ ಕಲ್ಲು ಅತ್ಯಮೂಲ್ಯವಾದುದು. ಆದರೆ ನಂಬದೆಯಿರುವವರಿಗೆ, “ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು”" 1PE_002_008,"ಮತ್ತು ಪವಿತ್ರಗ್ರಂಥದಲ್ಲಿ ಇನ್ನೊಂದೆಡೆ ಬರೆದಿರುವುದೇನಂದರೆ, “ಅದು ಜನರು ಎಡವುವ ಕಲ್ಲು ಮುಗ್ಗರಿಸುವ ಬಂಡೆ.” ಅವರು ದೇವರ ವಾಕ್ಯಕ್ಕೆ ಅವಿಧೇಯರಾದ್ದರಿಂದ ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರನ್ನು ನೇಮಿಸಲಾಗಿದೆ." 1PE_002_009,"ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ." 1PE_002_010,ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ. 1PE_002_011,"ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ." 1PE_002_012,"ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ, ಆಗ ಅವರು ಯಾವ ಸಂಗತಿಗಳನ್ನು ಕುರಿತಾಗಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಆತನ ಬರೋಣದ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು." 1PE_002_013,ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ 1PE_002_014,ಅಥವಾ ಅರಸನಿಂದ ಕೆಟ್ಟ ನಡತೆಯುಳ್ಳವರನ್ನು ದಂಡಿಸುವುದಕ್ಕೂ ಒಳ್ಳೆ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವುದಕ್ಕೂ ಕಳುಹಿಸಲ್ಪಟ್ಟಂಥ ಅಧಿಪತಿಗಳಿಗಾಗಲಿ ನೀವು ಅಧೀನರಾಗಿರಿ. 1PE_002_015,ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ. 1PE_002_016,"ಸ್ವತಂತ್ರರಂತೆ ನಡೆದುಕೊಳ್ಳಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಬಳಸಿಕೊಳ್ಳಬೇಡಿರಿ, ಆದರೆ ನೀವು ದೇವರ ದಾಸರಂತೆ ನಡೆದುಕೊಳ್ಳಿರಿ." 1PE_002_017,ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ. 1PE_002_018,"ಸೇವಕರೇ, ನಿಮ್ಮ ಯಜಮಾನರಿಗೆ ಪೂರ್ಣ ಗೌರವದಿಂದ ಅಧೀನರಾಗಿರಿ. ಒಳ್ಳೆಯವರೂ ಸಾತ್ವಿಕರೂ ಆಗಿರುವವರಿಗೆ ಮಾತ್ರವಲ್ಲದೆ ವಕ್ರಬುದ್ಧಿಯುಳ್ಳವರಿಗೂ ವಿಧೇಯರಾಗಿರಿ." 1PE_002_019,ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. 1PE_002_020,ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ. 1PE_002_021,ಇದಕ್ಕಾಗಿಯೇ ನೀವು ಕರೆಯಲ್ಪಟ್ಟಿದ್ದೀರಿ. ಕ್ರಿಸ್ತನು ಸಹ ನಿಮಗೋಸ್ಕರ ಬಾಧೆಯನ್ನನುಭವಿಸಿ ನೀವು ಆತನ ಹೆಜ್ಜೆಯ ಜಾಡಿಲ್ಲಿ ನಡೆಯಬೇಕೆಂದು ಮಾದರಿಯನ್ನು ತೋರಿಸಿ ಹೋದನು. 1PE_002_022,"ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ." 1PE_002_023,"ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು." 1PE_002_024,ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು. 1PE_002_025,ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ. 1PE_003_1-2,"ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು." 1PE_003_003,"ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು." 1PE_003_004,ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. 1PE_003_005,ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು. 1PE_003_006,ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ. 1PE_003_007,"ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ." 1PE_003_008,"ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ." 1PE_003_009,"ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ." 1PE_003_010,"ಏಕೆಂದರೆ ಪವಿತ್ರಗ್ರಂಥದಲ್ಲಿ ಬರೆದಿರುವಂತೆ, “ಜೀವವನ್ನು ಬಯಸುತ್ತಾ ಸುದಿನಗಳನ್ನು ನೋಡುವುದಕ್ಕೆ ಕಾದಿರುವಾತನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನು ವಂಚನೆಯ ಮಾತುಗಳನ್ನಾಡದಂತೆ ತುಟಿಗಳನ್ನು ಬಿಗಿಹಿಡಿದುಕೊಳ್ಳಲಿ." 1PE_003_011,ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ. 1PE_003_012,ಏಕೆಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ ಮತ್ತು ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಆದರೆ ಕೆಡುಕರಿಗೋ ಕರ್ತನು ವಿಮುಖನಾಗಿರುತ್ತಾನೆ.” 1PE_003_013,ನೀವು ಒಳ್ಳೆಯದನ್ನೇ ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ? 1PE_003_014,"ಒಂದು ವೇಳೆ ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನೀವು ಧನ್ಯರೇ. ಅವರ ಬೆದರಿಕೆಗೆ ಹೆದರಬೇಡಿರಿ, ಕಳವಳಪಡಬೇಡಿರಿ." 1PE_003_015,ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ. 1PE_003_016,ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೆಯ ನಡತೆಯನ್ನು ಕುರಿತು ಕೆಟ್ಟಮಾತುಗಳನ್ನಾಡುವವರು ನಿಮ್ಮನ್ನು ನಿಂದಿಸುವುದಕ್ಕೆ ನಾಚಿಕೆಪಡುವರು. 1PE_003_017,ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ. 1PE_003_018,"ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು." 1PE_003_019,ಇದಲ್ಲದೆ ಆತನು ಆತ್ಮರೂಪನಾಗಿ ಸೆರೆಯಲ್ಲಿದ್ದ ಆತ್ಮಗಳ ಬಳಿಗೆ ಹೋಗಿ ಸುವಾರ್ತೆಯನ್ನು ಸಾರಿದನು. 1PE_003_020,ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು. 1PE_003_021,ಆ ನೀರಿಗೆ ಅನುರೂಪವಾದ ದೀಕ್ಷಾಸ್ನಾನವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ದೇಹದ ಮೇಲಿನ ಕೊಳೆಯನ್ನು ಹೊಗಲಾಡಿಸುವಂಥದ್ದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿ ಬೇಕೆಂದು ದೇವರಿಗೆ ವಿಜ್ಞಾಪಿಸಿಕೊಳ್ಳುವಂಥದಾಗಿದೆ. 1PE_003_022,"ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ." 1PE_004_001,ಕ್ರಿಸ್ತನು ನಮಗೋಸ್ಕರ ತನ್ನ ಶರೀರದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅದೇ ಮನೋಭಾವವುಳ್ಳವರಾಗಿದ್ದು ಬಾಧೆಪಡಲು ಸಿದ್ಧರಾಗಿರಿ. ಏಕೆಂದರೆ ಶರೀರದಲ್ಲಿ ಬಾಧೆಪಟ್ಟವನು ಪಾಪ ಮಾಡುವುದನ್ನು ನಿಲ್ಲಿಸಿದವನಾಗಿದ್ದಾನೆ. 1PE_004_002,ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. 1PE_004_003,"ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು." 1PE_004_004,ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ. 1PE_004_005,ಅವರು ಬದುಕಿರುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಸಿದ್ಧವಾಗಿರುವಾತನಿಗೆ ಉತ್ತರ ಕೊಡಬೇಕು. 1PE_004_006,ಸತ್ತಿರುವವರು ಮನುಷ್ಯ ಜಾತಿಗೆ ಬರುವ ಮರಣವೆಂಬ ತೀರ್ಪನ್ನು ಶರೀರಗಳಲ್ಲಿದ್ದಾಗ ಹೊಂದಿದರು. ಅವರು ಆತ್ಮ ಸಂಬಂಧವಾಗಿ ದೇವರಂತೆ ಜೀವಿಸಲೆಂದು ಅವರಿಗೂ ಸುವಾರ್ತೆಯು ತಿಳಿಸಲ್ಪಟ್ಟಿತು. 1PE_004_007,ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಜಿತೇಂದ್ರಿಯರಾಗಿಯೂ ಯಾವಾಗಲೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರಿ. 1PE_004_008,ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ. 1PE_004_009,ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ. 1PE_004_010,ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ. 1PE_004_011,ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್. 1PE_004_012,"ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ." 1PE_004_013,ಆದರೆ ನೀವು ಎಷ್ಟರ ಮಟ್ಟಿಗೆ ಕ್ರಿಸ್ತನ ಬಾಧೆಗಳಲ್ಲಿ ಪಾಲುಗಾರರಾಗಿದ್ದೀರೋ ಅಷ್ಟರ ಮಟ್ಟಿಗೆ ಸಂತೋಷಪಡಿರಿ. ಆದ್ದರಿಂದ ಆತನ ಮಹಿಮೆಯ ಪ್ರತ್ಯಕ್ಷತೆಯಲ್ಲಿಯೂ ನೀವು ಸಂತೋಷಪಟ್ಟು ಉಲ್ಲಾಸಗೊಳ್ಳುವಿರಿ 1PE_004_014,ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಧನ್ಯರು. ಮಹಿಮೆಯ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ. 1PE_004_015,"ನಿಮ್ಮಲ್ಲಿ ಯಾವನಾದರು ಕೊಲೆಗಾರನು, ಕಳ್ಳನು, ದುಷ್ಟನು, ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು." 1PE_004_016,ಆದರೆ ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಆ ಹೆಸರಿನಿಂದಲೇ ದೇವರನ್ನು ಘನಪಡಿಸಲಿ. 1PE_004_017,"ನ್ಯಾಯವಿಚಾರಣೆಯ ಸಮಯ ಬಂದಿದೆ. ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಗಿದೆಯಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗುವುದಾದರೆ, ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಅಂತ್ಯ ಹೇಗಿರಬಹುದು?" 1PE_004_018,"ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಮತ್ತು ಪಾಪಿಷ್ಠನೂ ರಕ್ಷಣೆ ಹೊಂದುವುದು ಹೇಗೆ?" 1PE_004_019,ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ಒಳ್ಳೆದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿ ಕರ್ತನಿಗೆ ಒಪ್ಪಿಸಲಿ. 1PE_005_001,"ಸಭೆಯ ಹಿರಿಯರೇ, ಜೊತೆಹಿರಿಯವನಾದ ನಾನು ಕ್ರಿಸ್ತನ ಬಾಧೆಗಳನ್ನು ಕಣ್ಣಾರೆ ಕಂಡವನೂ, ಇನ್ನು ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಪಾಲುಗಾರನೂ ಆಗಿದ್ದು ನಿಮ್ಮನ್ನು ಪ್ರೋತ್ಸಾಹಿಸಿ ಹೇಳುವುದೇನಂದರೆ," 1PE_005_002,"ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ." 1PE_005_003,ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ. 1PE_005_004,ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ. 1PE_005_005,"ಯೌವನಸ್ಥರೇ, ಅದೇ ರೀತಿಯಾಗಿ ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನಮನಸ್ಸೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆ ಮಾಡಿರಿ. ಏಕೆಂದರೆ “ದೇವರು ಅಹಂಕಾರಿಗಳನ್ನು ವಿರೋಧಿಸುತ್ತಾನೆ. ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ.”" 1PE_005_006,ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು. 1PE_005_007,ನಿಮ್ಮ ಚಿಂತಾಭಾರವನ್ನೆಲ್ಲಾ ಆತನ ಮೇಲೆ ಹಾಕಿರಿ ಆತನು ನಿಮಗೋಸ್ಕರ ಚಿಂತಿಸುತ್ತಾನೆ. 1PE_005_008,ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ. 1PE_005_009,ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರೂ ಅಂಥ ಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂಬುದು ನಿಮಗೆ ತಿಳಿದಿದೆ. 1PE_005_010,"ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯ ಮಹಿಮೆಗೆ ಕರೆದ ಕೃಪಾಪೂರ್ಣನಾದ ದೇವರು ತಾನೇ, ನೀವು ಸ್ವಲ್ಪ ಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯಥಾಸ್ಥಿತಿಗೆ ತಂದು ಸ್ಥಿರಪಡಿಸಿ ಬಲಪಡಿಸುವನು." 1PE_005_011,ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್. 1PE_005_012,"ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ." 1PE_005_013,ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ. 1PE_005_014,ಪ್ರೀತಿಯಿಂದ ಮುದ್ದಿಟ್ಟು ಒಬ್ಬರನೊಬ್ಬರು ವಂದಿಸಿರಿ. ಕ್ರಿಸ್ತನಲ್ಲಿರುವ ನಿಮ್ಮೆಲ್ಲರಿಗೂ ಸಮಾಧಾನವುಂಟಾಗಲಿ.